ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ
ಶಿವಮೊಗ್ಗ, ಮೇ 22: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಗ್ಯಾರಂಟಿಯಾಗಿದ್ದು, ಕರ್ನಾಟಕ ಸರ್ಕಾರ ಅದನ್ನು ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ತಲಾ ಸುಮಾರು ₹3.5 ಕೋಟಿ ವೆಚ್ಚದಲ್ಲಿ 1000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲಾಗುತ್ತಿದ್ದು, ಈ ಶಾಲೆಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಇದು ಮಹತ್ವದ ಹೆಜ್ಜೆಯಾಗಿದ್ದು, ಮಕ್ಕಳ ಭವಿಷ್ಯಕ್ಕೆ ಆಶಾಕಿರಣವಾಗಲಿದೆ ಎಂದು ಹೇಳಿದರು.
ಈ ಪೈಕಿ 800 ಶಾಲೆಗಳನ್ನು ಶಿಕ್ಷಣ ಇಲಾಖೆ ಹಾಗೂ 200 ಶಾಲೆಗಳನ್ನು ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಜೂನ್ 1ರಂದು ಶಿವಮೊಗ್ಗದಲ್ಲಿ 7 ಕೆಪಿಎಸ್ ಶಾಲೆಗಳ ಶಂಕುಸ್ಥಾಪನೆ ನಡೆಯಲಿದ್ದು, ನಂತರ ಉಳಿದ ಶಾಲೆಗಳ ಡಿಪಿಆರ್ ಸಿದ್ಧಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಭಾಗವಹಿಸಲಿದ್ದು, ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಊಟ ಕೂಡ ಮಾಡಲಿದ್ದಾರೆ ಎಂದರು.
ಪಿಯುಸಿ ಫಲಿತಾಂಶದಲ್ಲಿ ಏರಿಕೆ
ಪಿಯುಸಿ ಪರೀಕ್ಷೆ-2 ನಂತರ ರಾಜ್ಯದ ಒಟ್ಟು ಫಲಿತಾಂಶ ಶೇ.92.25ಕ್ಕೆ ಏರಿಕೆಯಾಗಿದೆ. ಇದಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಶ್ರಮ ಕಾರಣ ಎಂದು ಅಭಿನಂದಿಸಿದರು.
ಈ ತಿಂಗಳ ಕೊನೆಯಲ್ಲಿ ಎಸ್ಎಸ್ಎಲ್ಸಿ ಎರಡನೇ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಉತ್ತಮ ಫಲಿತಾಂಶ ಬರುವ ವಿಶ್ವಾಸವಿದೆ ಎಂದರು.
ಶಿಕ್ಷಣದ ಗುಣಮಟ್ಟವೂ ಹೆಚ್ಚುತ್ತಿದ್ದು, ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರಮಾಣ 62ರಿಂದ 66.5ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.
867 ವಿದ್ಯಾರ್ಥಿಗಳಿಗೆ ಸನ್ಮಾನ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದ ಜಿಲ್ಲೆಯ 867 ವಿದ್ಯಾರ್ಥಿಗಳನ್ನು ಜೂನ್ 1ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 12 ಕೆಪಿಎಸ್ ಶಾಲೆಗಳಿದ್ದು, ಹೊಸದಾಗಿ 19 ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸಲಾಗುತ್ತಿದೆ. ಖಾಸಗಿ ಸಂಸ್ಥೆಯೊಂದು ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ನಿಧಿಯಿಂದ ₹12 ಕೋಟಿ ನೀಡಲು ಮುಂದಾಗಿದೆ ಎಂದರು.
ಎಸ್ಐಆರ್ ಪ್ರಕ್ರಿಯೆ ಬಗ್ಗೆ ಎಚ್ಚರಿಕೆ
ಮತದಾನವು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದು, ಎಸ್ಐಆರ್ ಪ್ರಕ್ರಿಯೆಯನ್ನು ಅಧಿಕಾರಿಗಳು ಜವಾಬ್ದಾರಿಯಿಂದ ನಿರ್ವಹಿಸಬೇಕು. ಮತದಾರರೂ ಸಹ ಎಚ್ಚರಿಕೆಯಿಂದ ಈ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಚಂದ್ರಭೂಪಾಲ್, ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಒ ಎನ್. ಹೇಮಂತ್, ಎಸ್ಪಿ ನಿಖಿಲ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…