ಶರಾವತಿ ಸಂತ್ರಸ್ತರ ದಶಕಗಳ ಕನಸಿನ ‘ಹಸಿರುಮಕ್ಕಿ ಸೇತುವೆ’ ಸಿದ್ಧ: ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ!
Hasirumakki Bridge, a decades-long dream of Sharavathi reservoir-displaced families in Shivamogga district, is nearing completion. Local residents hope MLA Beluru Gopalakrishna will inaugurate the bridge as a minister, bringing a new era of connectivity to Nittur, Sampekatte and surrounding villages.
ಮಲೆನಾಡಿನ ಜೀವನಾಡಿ ಶರಾವತಿ ನದಿಯ ಹಿನ್ನೀರಿನಲ್ಲಿ ಮುಳುಗಡೆಯಾಗಿ, ದಶಕಗಳ ಕಾಲ ದ್ವೀಪದಂತಾಗಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು , ಸಂಪೆಕಟ್ಟೆ , ಎಸ್ ಎಸ್ ಬೋಗ್ ಗ್ರಾಮ ಪಂಚಾಯತ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಬಹುದೊಡ್ಡ ಕನಸೊಂದು ಕೊನೆಗೂ ನನಸಾಗುವ ಕಾಲ ಕೂಡಿಬಂದಿದೆ. ಸಂಜೆ ಕವಿಯುತ್ತಿದ್ದಂತೆ ಲಾಂಚ್ ಸೇವೆ ಸ್ಥಗಿತಗೊಂಡು, ತುರ್ತು ಪರಿಸ್ಥಿತಿಯಲ್ಲೂ ಮರುದಿನ ಬೆಳಗಾಗುವವರೆಗೆ ಕಾಯಬೇಕಿದ್ದ ಆ ಭಾಗದ ಜನರ ಸಂಕಟಕ್ಕೆ ಮುಕ್ತಿ ನೀಡಲು ಹಸಿರುಮಕ್ಕಿ ಸೇತುವೆ ಉದ್ಘಾಟನೆಗೆ ಸಜ್ಜಾಗುತ್ತಿದೆ. ದಶಕಗಳ ಕಾಲ ಕತ್ತಲಲ್ಲಿದ್ದ ಶರಾವತಿ ಮುಳುಗಡೆ ಸಂತ್ರಸ್ತರ ಬಾಳಲ್ಲಿ ಈ ಸೇತುವೆ ಹೊಸ ಬೆಳಕು ಮೂಡಿಸುತ್ತಿದೆ. ಈ ಬೃಹತ್ ಕಾಮಗಾರಿ ಈಗ ಅಂತಿಮ ಘಟ್ಟ ತಲುಪಿದ್ದು, ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ.
ಇದರ ಬೆನ್ನಲ್ಲೇ, ದಶಕಗಳ ಕನಸು ನನಸಾಗುತ್ತಿರುವ ಸಂಭ್ರಮದಲ್ಲಿರುವ ಸ್ಥಳೀಯರ ಒಂದು ಪ್ರಮುಖ ಒತ್ತಾಸೆ ಮುನ್ನೆಲೆಗೆ ಬಂದಿದೆ. ಅದೆಂದರೆ, ತಮ್ಮ ನೆಚ್ಚಿನ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಕೇವಲ ಶಾಸಕರಾಗಿ ಮಾತ್ರವಲ್ಲದೆ, ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ಸಚಿವರಾಗಿ ಬಂದು ಈ ಸೇತುವೆಯನ್ನು ಉದ್ಘಾಟಿಸಬೇಕು ಎಂಬುದು ಆ ಭಾಗದ ಸಮಸ್ತ ಜನರ ಹೆಬ್ಬಯಕೆಯಾಗಿದೆ.
ಇದೇ ಸಂಭ್ರಮದ ಹಾಗೂ ನಿರೀಕ್ಷೆಯ ವಾತಾವರಣದ ನಡುವೆ, ಇಂದು ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಘಟಕದ ಮುಖಂಡರು ಹಾಗೂ ಗ್ರಾಮಸ್ಥರು ಒಟ್ಟಾಗಿ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು. ಸೇತುವೆಯ ಬಳಿ ನಡೆಯುತ್ತಿರುವ ಅಂತಿಮ ಹಂತದ ಕಾಮಗಾರಿಯನ್ನು ಖುದ್ದಾಗಿ ವೀಕ್ಷಿಸಿದ ಅವರು, ಕೆಲಸದ ವೇಗ ಹಾಗೂ ಗುಣಮಟ್ಟವನ್ನು ಕಂಡು ಅತೀವ ಹರ್ಷ ವ್ಯಕ್ತಪಡಿಸಿದರು. ಹಲವು ದಶಕಗಳಿಂದ ಕೇವಲ ಭರವಸೆಯಾಗಿಯೇ ಉಳಿದಿದ್ದ ಸೇತುವೆ ಇಂದು ಕಣ್ಣೆದುರೇ ಬೃಹದಾಕಾರವಾಗಿ ತಲೆಎತ್ತಿ ನಿಂತಿರುವುದನ್ನು ನೋಡಿದ ಗ್ರಾಮಸ್ಥರ ಕಣ್ಣಲ್ಲಿ ಸಾರ್ಥಕತೆಯ ಆನಂದ ಎದ್ದುಕಾಣುತ್ತಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಂದ್ರ ಜೋಗಿ ಅವರು, ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿಶೇಷ ಕಾಳಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ನೆನೆಗುದಿಗೆ ಬಿದ್ದಿದ್ದ ಸೇತುವೆ ಕಾಮಗಾರಿ ಇಂದು ಮುಕ್ತಾಯದ ಹಂತಕ್ಕೆ ಬಂದಿದೆ. ಈ ಭಾಗದ ಜನರ ಬಹು ನಿರೀಕ್ಷೆಯ ಸೇತುವೆ ಅತೀ ಶೀಘ್ರದಲ್ಲಿಯೇ ಲೋಕಾರ್ಪಣೆಯಾಗಲಿದ್ದು, ಇದನ್ನು ನಮ್ಮ ನೆಚ್ಚಿನ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವರಾಗಿ ಉದ್ಘಾಟಿಸುವ ನಿರೀಕ್ಷೆ ಇದೆ ಎಂದು ಸ್ಥಳೀಯರ ಪರವಾಗಿ ಒಕ್ಕೊರಲಿನ ಆಗ್ರಹ ವ್ಯಕ್ತಪಡಿಸಿದರು.
ಈ ಬಗ್ಗೆ ಮಾತನಾಡಿದ ಮುಖಂಡರಾದ ಸುರೇಶ್ ಕೂಡ್ಲುಕೊಪ್ಪ ಅವರು, ಸೇತುವೆ ನಿರ್ಮಾಣದ ಹಿಂದೆ ಕಾಗೋಡು ತಿಮ್ಮಪ್ಪನವರ ಪರಿಶ್ರಮ ಇದೆ ಎಂಬುದನ್ನು ಸ್ಮರಿಸಿದರು. ಈ ಸೇತುವೆ ಕಾಮಗಾರಿ ಸ್ಥಗಿತವಾಗಿದ್ದಾಗ ನಮಗೆಲ್ಲಾ ಆತಂಕ ಉಂಟಾಗಿತ್ತು, ಈಗ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಆಸಕ್ತಿಯಿಂದ ಕಾಮಗಾರಿ ಚುರುಕಾಗಿ ನಡೆದು ಅಂತಿಮ ಹಂತಕ್ಕೆ ಬಂದಿದೆ. ಈ ಭಾಗಕ್ಕೆ ಲಾಂಚ್ ವ್ಯವಸ್ಥೆ ಇದ್ದರೂ ಸಹ ಸಂಜೆ ಮೇಲೆ ಓಡಾಟ ಸ್ಥಗಿತವಾಗುತ್ತಿತ್ತು. ಆ ಭಾಗದ ಜನ ಸಾಗರಕ್ಕೆ ಬರಬೇಕು ಅಂದರೆ ಮತ್ತೆ ಬೆಳಗ್ಗೆ ತನಕ ಕಾಯಬೇಕಿತ್ತು, ಇನ್ನು ಈ ಭಾಗದ ಜನ ಸಾಗರ ಭಾಗಕ್ಕೆ ಹೋಗಬೇಕಾಗಿದ್ದರೆ ಹಲವು ಕಿಲೋಮೀಟರ್ ದೂರ ಸಾಗಬೇಕಿತ್ತು. ಸೇತುವೆ ನಿರ್ಮಾಣದಿಂದ ನಮಗೆ ದೂರದ ಪಯಾಣ ಸನಿಹವಾಗಲಿದೆ ಎಂದು ಅವರು ಸಮಾಧಾನ ವ್ಯಕ್ತಪಡಿಸಿದರು.
ಪ್ರಸ್ತುತ ದಿನಗಳಲ್ಲಿ ಮಳೆಯ ಕೊರತೆಯಿಂದ ನೀರು ಕಡಿಮೆಯಾಗಿರುವುದರಿಂದ ಲಾಂಚ್ ಸೇವೆಯನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಜನಸಾಮಾನ್ಯರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ವಾಸ್ತವಿಕ ತೊಂದರೆಯನ್ನು ಅರಿತು, ಅಧಿಕೃತ ಲೋಕಾರ್ಪಣೆಗೂ ಮುಂಚಿತವಾಗಿ ಸೇತುವೆಯ ಮೇಲೆ ಕೇವಲ ಬೈಕ್ ಹಾಗೂ ಕಾರುಗಳಂತಹ ಲಘು ವಾಹನಗಳ ಓಡಾಟಕ್ಕಾದರೂ ಅವಕಾಶ ಮಾಡಿಕೊಡುವಂತೆ ಕಾಮಗಾರಿ ನಡೆಸುತ್ತಿರುವ ಕೆ.ಆರ್.ಸಿ.ಡಿ.ಎಲ್ ಸಂಸ್ಥೆಯ ಅಧಿಕಾರಿಗಳ ಬಳಿ ಮನವಿ ಮಾಡಲಾಗಿದೆ. ಸ್ಥಳೀಯರ ಈ ಮನವಿಗೆ ಸಂಸ್ಥೆಯ ಕಡೆಯಿಂದ ಸಕಾರಾತ್ಮಕ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಯುವ ಮುಖಂಡ ನಾಗೋಡಿ ವಿಶ್ವನಾಥ್ ಅವರು ಮಾಹಿತಿ ನೀಡಿದರು.
ಒಟ್ಟಿನಲ್ಲಿ, ಇಂದು ಕಾಮಗಾರಿ ವೀಕ್ಷಿಸಿ ಸಂತಸಪಟ್ಟಿರುವ ಮುಳುಗಡೆ ಸಂತ್ರಸ್ತ ಗ್ರಾಮಸ್ಥರು, ತಮ್ಮ ದಶಕಗಳ ಕನಸಿನ ಸೇತುವೆಯ ಮೇಲೆ ಮುಕ್ತವಾಗಿ ಸಂಚರಿಸುವ ಹಾಗೂ ತಮ್ಮ ನೆಚ್ಚಿನ ಶಾಸಕರು ಸಚಿವರಾಗಿ ಬಂದು ಈ ಸೇತುವೆಯನ್ನು ಅಧಿಕೃತವಾಗಿ ಜನರ ಬಳಕೆಗೆ ಮುಕ್ತಗೊಳಿಸುವ ಆ ಸುದಿನಕ್ಕಾಗಿ ಅತ್ಯಂತ ಕಾತರದಿಂದ ಕಾಯುತ್ತಿದ್ದಾರೆ.
ಈ ಸಂಧರ್ಭದಲ್ಲಿ ಮುಖಂಡರಾದ ಗಣಪತಿ ಜಾಲ , ಚಂದಯ್ಯ ಜೈನ್ ನಾಗೋಡಿ , ರಾಘವೇಂದ್ರ ಆಚಾರ್ ಕೆಬಿ ಸರ್ಕಲ್ , ರವೀಂದ್ರ ಚನ್ನಪ್ಪ ನಿಟ್ಟೂರು , ಪರಮೇಶ್ವರ ಕೂಡ್ಲುಕೊಪ್ಪ , ಸುಬ್ರಹ್ಮಣ್ಯ ಜೀವಿ ನಿಟ್ಟೂರು , ಸಂತೋಷ್ ಜಿ ಕೆ , ರವೀಶ್ ಇಕ್ಕಿಬೀಳು , ಮಂಜು ಲಕ್ಮನೆ ಹಾಗೂ ಇನ್ನಿತರರು ಇದ್ದರು.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…