ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ
Shikaripura Police crack a house burglary case and arrest an accused. Gold ornaments, silver articles and cash worth ₹5.41 lakh recovered during the operation.
ಶಿಕಾರಿಪುರ, ಜೂನ್ 11: ಶಿಕಾರಿಪುರ ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯೊಂದರ ಬೀರುವಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ ಬಹುತೇಕ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಸುನಗರ 2ನೇ ಕ್ರಾಸ್ ನಿವಾಸಿ ಗೌರಮ್ಮ ಅವರು ಜೂನ್ 4ರಂದು ಬೆಳಿಗ್ಗೆ 8.30ರಿಂದ ಸಂಜೆ 5.45ರವರೆಗೆ ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗಡೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆಯೊಳಗೆ ನುಗ್ಗಿ ಬೀರುವಿನ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ಕಳವು ಮಾಡಿದ್ದರು.
ಈ ಸಂಬಂಧ ಗೌರಮ್ಮ ಅವರು ಜೂನ್ 5ರಂದು ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ತನಿಖೆ ವೇಳೆ ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ – ಮಾಸೂರು ರಸ್ತೆ ನಿವಾಸಿ 47 ವರ್ಷದ ಅಮಿತ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ 28 ಗ್ರಾಂ ತೂಕದ ಚಿನ್ನಾಭರಣಗಳು (ಮೌಲ್ಯ ₹3,14,400), 134 ಗ್ರಾಂ ತೂಕದ ಬೆಳ್ಳಿ ವಸ್ತುಗಳು (ಮೌಲ್ಯ ₹26,800) ಹಾಗೂ ₹2 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಒಟ್ಟಾರೆ ₹5,41,200 ಮೌಲ್ಯದ ಕಳುವಾದ ಸೊತ್ತನ್ನು ಪೊಲೀಸರು ಜಪ್ತಿ ಮಾಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ಕುರಿತು ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ಮುಂದುವರಿದಿದೆ.




