ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ
Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover.
ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಅಧಿಕೃತ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ವಿಜಯ್ ಅವರು ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೈಂದೂರು ತಾಲೂಕಿನ ಕೊಲ್ಲೂರಿಗೆ ತೆರಳಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದಾರೆ.
ದೇವಾಲಯ ಭೇಟಿ ಬಳಿಕ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರಳಿ, ವಿಶೇಷ ವಿಮಾನದ ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಮಿಳುನಾಡು ಸಿಐಡಿ ಭದ್ರತಾ ವಿಭಾಗ ತಿಳಿಸಿದೆ.
ಮುಖ್ಯಮಂತ್ರಿ ವಿಜಯ್ ಅವರಿಗೆ Z+ ಭದ್ರತಾ ವ್ಯವಸ್ಥೆ ಇರುವುದರಿಂದ, ಕರ್ನಾಟಕ ಪೊಲೀಸ್ ಇಲಾಖೆ ಹಾಗೂ ಗುಪ್ತಚರ ಸಂಸ್ಥೆಗಳಿಗೆ ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ದೇವಸ್ಥಾನ ಆವರಣ, ವಿಮಾನ ನಿಲ್ದಾಣ ಹಾಗೂ ಪ್ರಯಾಣ ಮಾರ್ಗದಾದ್ಯಂತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಜನಸಂದಣಿ ನಿಯಂತ್ರಣ ಮತ್ತು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ವಿಜಯ್ ಸಂಚರಿಸುವ ಮಾರ್ಗವು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಸೌಪರ್ಣಿಕಾ ನದಿ ಜಲಾನಯನ ಪ್ರದೇಶದ ಅರಣ್ಯ ಹಾಗೂ ಗುಡ್ಡಗಾಡು ಪ್ರದೇಶಗಳ ಮೂಲಕ ಸಾಗುವುದರಿಂದ, ಅರಣ್ಯ ಇಲಾಖೆಯ ಸಿಬ್ಬಂದಿಗೆ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ವನ್ಯಜೀವಿಗಳ ಚಲನವಲನಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ.
ಇದರೊಂದಿಗೆ, ವಿಧ್ವಂಸಕ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ ವಿಮಾನ ನಿಲ್ದಾಣ, ದೇವಸ್ಥಾನ ಹಾಗೂ ಪ್ರಯಾಣ ಮಾರ್ಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಮತ್ತು ಪ್ರವೇಶ ನಿಯಂತ್ರಣ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ.