Headlines

ಮಾಜಿ ಶಾಸಕ , ಬಿಜೆಪಿಯ ಹಿರಿಯ ಮುಖಂಡ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Former MLA B. Swamirao’s son and former Sonale Gram Panchayat President Subrahmanya S. Rao joined the Indian National Congress in the presence of MLA Beluru Gopalakrishna at Ripponpet.

ರಿಪ್ಪನ್‌ಪೇಟೆ: ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರ ಪುತ್ರ ಹಾಗೂ ಸೊನಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಎಸ್. ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜ ಸ್ವೀಕರಿಸಿ ಕಾಂಗ್ರೆಸ್ ಸೇರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಎಸ್. ರಾವ್, ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಅಭಿವೃದ್ಧಿ ಪರ ಕಾರ್ಯವೈಖರಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಮತ್ತು ಆಡಳಿತದಿಂದ ಪ್ರೇರಿತರಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿರುವುದಾಗಿ ತಿಳಿಸಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸುಬ್ರಹ್ಮಣ್ಯ ಎಸ್. ರಾವ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿ, ಅವರ ಸೇರ್ಪಡೆಯಿಂದ ಹೋಬಳಿ ಹಾಗೂ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಆಯನೂರು ಮಂಜುನಾಥ್, ಕಲಗೋಡು ರತ್ನಾಕರ್, ಬಿ.ಪಿ. ರಾಮಚಂದ್ರ, ಶ್ವೇತಾ ಬಂಡಿ, ಚಂದ್ರಮೌಳಿ, ಸುಮಾ ಸುಬ್ರಹ್ಮಣ್ಯ, ಅಮೀರ್ ಹಂಜಾ, ಲಕ್ಷಣಗೌಡ, ಈಶ್ವರಪ್ಪ ಗೌಡ, ಚಿದಂಬರಂ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಎಸ್. ರಾವ್ ಅವರ ಕಾಂಗ್ರೆಸ್ ಸೇರ್ಪಡೆ ಹೊಸನಗರ ತಾಲ್ಲೂಕಿನ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂಬರುವ ದಿನಗಳಲ್ಲಿ ಸ್ಥಳೀಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

About The Author

Exit mobile version