ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ…
Former Shivamogga MLA and senior Congress leader H.M. Chandrashekharappa passed away at the age of 78. Public viewing will be held on July 27, followed by the last rites in Shivamogga.
ಶಿವಮೊಗ್ಗ: ಶಿವಮೊಗ್ಗದ ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಭಾನುವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
1999ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಹೆಚ್.ಎಂ. ಚಂದ್ರಶೇಖರಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಶಿವಮೊಗ್ಗ ನಗರಸಭೆ ಅಧ್ಯಕ್ಷ, ವೀರಶೈವ-ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ವಲಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಳೆ ಅಂತಿಮ ದರ್ಶನ
ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ ಅಂತ್ಯಕ್ರಿಯೆ
ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.
ಹಿರಿಯ ನಾಯಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಆಗಮಿಸುತ್ತಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ.
ಸಂತಾಪ :
ಮಾಜಿ ಶಾಸಕ ಹೆಚ್ ಎಂ ಚಂದ್ರಶೇಖರಪ್ಪ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ , ಶಾಸಕಿ ಶಾರದಾ ಪೂರ್ಯನಾಯ್ಕ್ , ಮಾಜಿ ಸಚಿವ ಮಧು ಬಂಗಾರಪ್ಪ , ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್ , ಮುಖಂಡರಾದ ಕಲಗೋಡು ರತ್ನಾಕರ್ , ಬಿ ಪಿ ರಾಮಚಂದ್ರ , ಮಾಸ್ತಿಕಟ್ಟೆ ಸುಬ್ರಹ್ಮಣ್ಯ , ಅಮೀರ್ ಹಂಜಾ , ಈಶ್ವರಪ್ಪಗೌಡ , ಆಸೀಫ್ ಭಾಷಾ , ಬಿಜಿ ಚಂದ್ರಮೌಳಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.