ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ
MLA Beluru Gopalakrishna extends financial assistance to the family of a PUC student seriously injured after a tree fell on her during heavy rain near Ripponpet. She is currently undergoing treatment at Wenlock Hospital, Mangaluru.
ರಿಪ್ಪನ್ಪೇಟೆ: ಭಾರಿ ಗಾಳಿ-ಮಳೆಯ ವೇಳೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯ ಚಿಕಿತ್ಸೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ.
ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಶೇಖರಪ್ಪ ಅವರ ಪುತ್ರಿ ನೀಲಾವತಿ ಗರ್ತಿಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಜುಲೈ 24ರಂದು ಸಂಜೆ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಮನೆಗೆ ಮರಳುತ್ತಿದ್ದ ವೇಳೆ ಭಾರಿ ಗಾಳಿ-ಮಳೆಯ ಕಾರಣ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕುಟುಂಬದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವುದನ್ನು ಮನಗಂಡ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.
ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿನಲ್ಲಿ ಇರುವುದರಿಂದ, ಅವರ ಪರವಾಗಿ ಪಕ್ಷದ ಮುಖಂಡರು ವಿದ್ಯಾರ್ಥಿನಿಯ ತಂದೆ ಶೇಖರಪ್ಪ ಅವರಿಗೆ ಆರ್ಥಿಕ ನೆರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮಧುಸೂಧನ್, ಆಸೀಫ್ ಭಾಷಾ, ನಿರೂಪ್ ಕುಮಾರ್, ನೇಮಣ್ಣ ಬಂಡಿ, ಶ್ರೀಧರ್ ಹಾಗೂ ನವೀನ್ ಉಪಸ್ಥಿತರಿದ್ದರು.



