ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
Police arrest Raghavendra alias Apple Raghu in Gartikere for allegedly assaulting a man with an iron rod. The victim sustained serious injuries and was shifted to a private hospital in Shivamogga.
ರಿಪ್ಪನ್ ಪೇಟೆ: ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಿ, ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಆತನ ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗರ್ತಿಕೆರೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿತ್ತು. ಹಲ್ಲೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಗೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಗರ್ತಿಕೆರೆ ಗ್ರಾಮದ ರಾಘವೇಂದ್ರ ಅಲಿಯಾಸ್ ಆಪಲ್ ರಾಘು ಬಂಧಿತ ಆರೋಪಿ. ಕೊಲೆ ಯತ್ನ ಪ್ರಕರಣದಡಿ ಆತನನ್ನು ಬಂಧಿಸಲಾಗಿದೆ.
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ ಪಟ್ಟಣದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ಪೊಲೀಸರು, ಇಂದು ಬೆಳಗ್ಗೆ ರಾಘವೇಂದ್ರನನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಹಲ್ಲೆಗೊಳಗಾದ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಇನ್ನು, ಹಲ್ಲೆ ನಡೆಸಿದ ಬಳಿಕ ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಮಂಜುನಾಥ್ ಅವರ ತಲೆಯ ಮೇಲೆ ಆರೋಪಿ ಕಾಲಿಟ್ಟು ಅಟ್ಟಹಾಸ ಮೆರೆದಿರುವ ದೃಶ್ಯವೂ ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬಂದಿದೆ. ಪ್ರಕರಣದ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.