ಹೊಸನಗರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್
Hosanagara Police arrested an accused who had escaped after allegedly attacking Forest Department staff while being escorted to Shivamogga District Prison. He has been remanded to judicial custody.
ಹೊಸನಗರ, ಆ.2: ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ನ್ಯಾಯಾಂಗ ಬಂಧನದಿಂದ ಪರಾರಿಯಾಗಿದ್ದ ಆರೋಪಿಯನ್ನು ಹೊಸನಗರ ಪೊಲೀಸರು ಭಾನುವಾರ ಬೆಳಗ್ಗೆ ಆತನ ಮನೆಯ ಸಮೀಪ ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಯನ್ನು ತಾಲೂಕಿನ ಅಡುಗೋಡಿ ನಿವಾಸಿ ವೆಂಕಟೇಶ್ ಪುಟ್ಟಪ್ಪ (36) ಎಂದು ಗುರುತಿಸಲಾಗಿದೆ.
ಈತನ ವಿರುದ್ಧ 2019-20ರ ಅವಧಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 15ರಂದು ಆರೋಪಿಯನ್ನು ಹೊಸನಗರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಆರೋಪಿಯನ್ನು ಅರಣ್ಯ ಇಲಾಖೆಯ ಜೀಪಿನಲ್ಲಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಹೋಟೆಲ್ವೊಂದರ ಬಳಿ ಹಸಿವಿನ ಕಾರಣ ನೀಡಿ ವಾಹನ ನಿಲ್ಲಿಸಲಾಗಿತ್ತು. ಈ ವೇಳೆ ಉಪವಲಯ ಅರಣ್ಯಾಧಿಕಾರಿ ಇಬ್ರಾಹಿಂ ಹಾಗೂ ಅರಣ್ಯ ವೀಕ್ಷಕ ಅಯಾನ್ ಬಡೆಬಾಯಿ ಆರೋಪಿಗೆ ಆಹಾರ ತರಲು ತೆರಳಿದ್ದರು. ಜೀಪಿನಲ್ಲಿದ್ದ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಹಾಗೂ ವಾಹನ ಚಾಲಕ ನಾಗೇಂದ್ರ ಅವರ ಮೇಲೆ ಏಕಾಏಕಿ ದಾಳಿ ನಡೆಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.
ಈ ಸಂಬಂಧ ಕೊಲ್ಲೂರು ವನ್ಯಜೀವಿ ವಲಯದ ಕಟ್ಟಿನಹೊಳೆ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸುನೀಲ್ ಡಿ. ಕುಂಬಾರ್ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೊಸನಗರ ಪೊಲೀಸರು ಸತತ ಕಾರ್ಯಾಚರಣೆ ನಡೆಸಿ, ಭಾನುವಾರ ಬೆಳಗ್ಗೆ ಆರೋಪಿಯನ್ನು ಆತನ ಮನೆಯ ಸಮೀಪ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಪಿಐ ಗೌಡಪ್ಪಗೌಡ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐ ಶಂಕರಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳಾದ ಶಿವಕುಮಾರ, ಸುನೀಲ್, ನಗರ ಪೊಲೀಸ್ ಠಾಣೆಯ ರಾಘವೇಂದ್ರ ಮತ್ತು ಮಂಜುನಾಥ್ ಭಾಗವಹಿಸಿದ್ದರು.



