ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ
Rural teacher Ratnakumari from Samatagaru Government Higher Primary School in Hosanagara, Shivamogga, has been selected for the prestigious National Teachers Award.
ಹೊಸನಗರ: ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಗುರುತಿಸಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಒಲಿದಿದೆ.
ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದೇಶಾದ್ಯಂತ ಆಯ್ಕೆ ಮಾಡಿರುವ 48 ಅತ್ಯುತ್ತಮ ಶಿಕ್ಷಕರ ಪೈಕಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಶಿಕ್ಷಕರಾಗಿ ರತ್ನಕುಮಾರಿ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಅವರು ನೀಡಿರುವ ಕೊಡುಗೆ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೈಗೊಂಡಿರುವ ಪ್ರಯತ್ನಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಬದ್ಧತೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.
ಶಿಕ್ಷಕ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ, ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿಯುತ ಕಾಯಕವೆಂದು ಪರಿಗಣಿಸಿ ರತ್ನಕುಮಾರಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಸೀಮಿತ ಸೌಲಭ್ಯಗಳ ನಡುವೆಯೂ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅವರು ಕೈಗೊಂಡಿರುವ ಪ್ರಯತ್ನಗಳು ಪ್ರಶಸ್ತಿಗೆ ಪ್ರಮುಖ ಕಾರಣವಾಗಿವೆ.
ಸೆಪ್ಟೆಂಬರ್ 5ರಂದು ಪ್ರಶಸ್ತಿ ಪ್ರದಾನ
ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 5ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರತ್ನಕುಮಾರಿ ಅವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಸಾಧನೆ ಹೊಸನಗರ ತಾಲೂಕು ಮಾತ್ರವಲ್ಲದೆ ಶಿವಮೊಗ್ಗ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೂ ಹೆಮ್ಮೆಯ ಸಂಗತಿಯಾಗಿದೆ.
ಸಚಿವ ಮಧು ಬಂಗಾರಪ್ಪ ಅಭಿನಂದನೆ
ರತ್ನಕುಮಾರಿ ಅವರ ಸಾಧನೆಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮೀಣ ಮಕ್ಕಳಲ್ಲಿ ಜ್ಞಾನದ ಬೆಳಕು ಮೂಡಿಸುತ್ತಿರುವ ರತ್ನಕುಮಾರಿ ಅವರ ಸೇವೆ ಇಲಾಖೆ, ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಮ್ಮೆ ತಂದಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರತ್ನಕುಮಾರಿ ಅವರ ರಾಷ್ಟ್ರೀಯ ಮಟ್ಟದ ಈ ಗೌರವವು ಗ್ರಾಮೀಣ ಪ್ರದೇಶಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಮತ್ತಷ್ಟು ಪ್ರೇರಣೆ ನೀಡುವಂತಾಗಿದೆ.
ಪೋಸ್ಟ್ ಮ್ಯಾನ್ ನ್ಯೂಸ್ ಅಭಿನಂದನೆ
ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ರತ್ನಕುಮಾರಿ ಅವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ಡಿಜಿಟಲ್ ಮೀಡಿಯಾ ಬಳಗದ ಹೃತ್ಪೂರ್ವಕ ಅಭಿನಂದನೆಗಳು. ಅವರ ಶೈಕ್ಷಣಿಕ ಸೇವೆ ಮತ್ತಷ್ಟು ಎತ್ತರಕ್ಕೆ ಸಾಗಲಿ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಲಿ ಎಂಬುದು ನಮ್ಮ ಆಶಯ.