ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

Illegal cow transportation allegations surface again in Shivamogga as Bajrang Dal workers are allegedly attacked while trying to stop a pickup vehicle near Saluru.

ರಿಪ್ಪನ್ ಪೇಟೆ : ಮಲೆನಾಡಿನಲ್ಲಿ ಅಕ್ರಮ ಗೋ ಸಾಗಾಟದ ಆರೋಪ ಮತ್ತೆ ಮುನ್ನೆಲೆಗೆ ಬಂದಿದ್ದು, ಸಾಗಾಟವನ್ನು ತಡೆಯಲು ಮುಂದಾದ ಬಜರಂಗದಳದ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಶಿಕಾರಿಪುರ ತಾಲೂಕಿನ ಸಾಲೂರು ಸಮೀಪ ನಡೆದಿದೆ.

ಶನಿವಾರ ಮಧ್ಯರಾತ್ರಿ ರಿಪ್ಪನ್‌ಪೇಟೆ ಸಮೀಪದ ಹರತಾಳು ಭಾಗದಲ್ಲಿ ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಇದನ್ನು ಗಮನಿಸಿದ ಹರತಾಳು ಗ್ರಾಮದ ಬಜರಂಗದಳದ ಕಾರ್ಯಕರ್ತರಾದ ಚಂದನ್, ಕಿರಣ್ ಹಾಗೂ ಅಭಿಲಾಷ್ ವಾಹನವನ್ನು ಬೆನ್ನಟ್ಟಿದ್ದಾರೆ.

ವಾಹನವನ್ನು ಹಿಂಬಾಲಿಸುತ್ತಿದ್ದ ವೇಳೆ ಆರೋಪಿಗಳು ಪೊಲೀಸ್ ಚೆಕ್‌ಪೋಸ್ಟ್‌ನಲ್ಲೂ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ಸಾಲೂರು ಸಮೀಪ ವಾಹನವನ್ನು ತಡೆದು ನಿಲ್ಲಿಸಲು ಕಾರ್ಯಕರ್ತರು ಪ್ರಯತ್ನಿಸಿದಾಗ, ದುಷ್ಕರ್ಮಿಗಳ ಗುಂಪು ಅವರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಕಾರನ್ನು ಪುಡಿ ಪುಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಕೇವಲ ವಾಹನಗಳನ್ನು ಜಪ್ತಿ ಮಾಡುವುದರಿಂದ ಪ್ರಕರಣ ಮುಗಿಯುವುದಿಲ್ಲ. ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ಜಾಮೀನು ಸಿಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ವಿಜಯೇಂದ್ರ, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಬಹುದು ಎಂದು ಎಚ್ಚರಿಸಿದ್ದಾರೆ.

About The Author