ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

Bhadravati police arrested a man accused of cheating a woman in the name of black magic and recovered 161 grams of gold ornaments and gold bullion worth ₹22.5 lakh.

ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ ಆರೋಪಿಯನ್ನು ಹೊಸಮನೆ ಪೊಲೀಸರು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.

ಭದ್ರಾವತಿ ಗಾಂಧಿನಗರದ ನಿವಾಸಿ ಹಾಗೂ ಕೆಎಸ್‌ಆರ್‌ಟಿಸಿ ಕಿರಿಯ ಸಹಾಯಕಿಯಾಗಿರುವ 36 ವರ್ಷದ ಮಂಗಳ ನಾಯಕ್ ಅವರು ಸೆಪ್ಟೆಂಬರ್ 7ರಂದು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಪ್ರಕಾರ, ಮುರಳಿ ಮತ್ತು ಆತನ ಸಹೋದರ ರವಿ ಎಂಬವರು ಮಂಗಳ ನಾಯಕ್ ಅವರಿಗೆ ಪರಿಚಯವಾಗಿದ್ದರು. ಬಳಿಕ, ನಿಮ್ಮ ಮೇಲೆ ವಾಮಾಚಾರ ಪ್ರಯೋಗವಾಗಿದ್ದು, ಅದನ್ನು ತೆಗೆಸದೇ ಹೋದರೆ ನಿಮಗೂ ಹಾಗೂ ನಿಮ್ಮ ಮಕ್ಕಳಿಗೂ ದೊಡ್ಡ ಮಟ್ಟದ ಸಮಸ್ಯೆಯಾಗಲಿದೆ ಎಂದು ನಂಬಿಸಿದ್ದಾರೆ ಎನ್ನಲಾಗಿದೆ.

ನಂತರ ಮನೆಗೆ ಬಂದು ಪೂಜೆ ನಡೆಸಿದ ಆರೋಪಿಗಳು, ಪೂಜೆ ಪೂರ್ಣಗೊಂಡ ಬಳಿಕ ಬಂಗಾರದ ಒಡವೆಗಳನ್ನು ತಮ್ಮ ಬಳಿ ನೀಡುವಂತೆ ತಿಳಿಸಿದ್ದಾರೆ. ಅವುಗಳನ್ನು ತಮ್ಮ ಮನೆಗೆ ಕೊಂಡೊಯ್ದು ವಿಶೇಷ ಪೂಜೆ ಮಾಡಿ ವಾಪಸ್ ನೀಡುವುದಾಗಿ ಹೇಳಿ ಮಹಿಳೆಯನ್ನು ನಂಬಿಸಿ, ಸುಮಾರು 193 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ಹಣ ಪಡೆದುಕೊಂಡು ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.155/2026, ಬಿಎನ್‌ಎಸ್ ಕಲಂ 316(2), 318(4) ಸಹಿತ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗಿದ ಕೆಲವೇ ಗಂಟೆಗಳಲ್ಲಿ ಮುರುಳಿ ಅಲಿಯಾಸ್ ಕರಿಯಾ, 31 ವರ್ಷ, ತಿಪ್ಲಾಪುರ ಕ್ಯಾಂಪ್, ಭದ್ರಾವತಿ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರವಿ ಅಂಗಡಿಯಲ್ಲಿ ಅಡವಿಟ್ಟಿದ್ದ ಹಾಗೂ ಚಿನ್ನವನ್ನು ಕರಗಿಸಿ ಗಟ್ಟಿಯಾಗಿ ಮಾಡಿಕೊಂಡು ಮನೆಯಲ್ಲಿ ಬಚ್ಚಿಟ್ಟಿದ್ದ ಒಟ್ಟು ಸುಮಾರು ₹22.50 ಲಕ್ಷ ಮೌಲ್ಯದ 161 ಗ್ರಾಂ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಹಾಗೂ ಮಾಲು ಪತ್ತೆಗಾಗಿ ಭದ್ರಾವತಿ ಉಪವಿಭಾಗದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ, ನಗರ ವೃತ್ತದ ಸಿಪಿಐ ನಾಗಮ್ಮ ಅವರ ಮಾರ್ಗದರ್ಶನದಲ್ಲಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದಪ್ಪ ಎಂ.ಪಿ. ಹಾಗೂ ಸಿಬ್ಬಂದಿಗಳಾ ಆದರ್ಶ ಶೆಟ್ಟಿ, ಮನ್ಸೂದ್ ಖಾನ್, ಆಸ್ಟೀನ್,  ಕಾಂತರಾಜ ಬಿ ಎನ್. ಹಣಮಂತ ಅವಟಿ, ಸುನೀತಾ ໖໐,  ಶ್ರೀಧರ ರವರ ಒಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ತಂಡದ ಕಾರ್ಯವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಅವರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

About The Author