ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ
BJP leaders in Sagar have criticised MLA Belur Gopalakrishna for allegedly remaining absent from Teachers’ Day celebrations and giving priority to a protest march in a neighbouring taluk.
ಸಾಗರ: ದೇಶಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಗೈರಾಗಿರುವುದು ಶಿಕ್ಷಕ ಸಮುದಾಯಕ್ಕೆ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ತೋರಿದ ಅಗೌರವವಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಮುಖ್ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಬಿಎಲ್ಎ-1 ಆರ್.ಟಿ. ಗೋಪಾಲ್ ಆರೋಪಿಸಿದ್ದಾರೆ.
ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶ ನಿರ್ಮಾಣದ ಮಹತ್ವದ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ದೊಡ್ಡದಾಗಿದೆ. ಸಮಾಜದ ಭವಿಷ್ಯವನ್ನು ರೂಪಿಸುವ ಶಿಕ್ಷಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 5ರಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಈ ಬಾರಿ ತಾಲೂಕಿನ ಶಿಕ್ಷಕಿಯೊಬ್ಬರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆತಿರುವುದು ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಇನ್ನಷ್ಟು ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕಾಗಿತ್ತು ಎಂದು ಅವರು ಅಭಿಪ್ರಾಯಪಟ್ಟರು.ಆದರೆ ಹೊಸನಗರದಲ್ಲಿ ಸೆಪ್ಟೆಂಬರ್ 5ರಂದು ನಡೆಯಬೇಕಿದ್ದ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 7ರಂದು ಆಚರಿಸಲು ಸೂಚಿಸಲಾಗಿದೆ ಎಂದು ಆರೋಪಿಸಿದ ಆರ್.ಟಿ. ಗೋಪಾಲ್, ಈ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಸೆಪ್ಟೆಂಬರ್ 5ರಂದು ಸಾಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೂ ಶಾಸಕ ಬೇಳೂರು ಗೋಪಾಲಕೃಷ್ಣ ಗೈರಾಗಿದ್ದರು ಎಂದು ಆರೋಪಿಸಿದರು. ಶಿಕ್ಷಕರಿಗೆ ಗೌರವ ಸಲ್ಲಿಸುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸದೇ, ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವುದು ಕ್ಷೇತ್ರದ ಜನತೆಗೆ ನಿರಾಸೆ ಮೂಡಿಸಿದೆ ಎಂದು ಅವರು ಟೀಕಿಸಿದರು.
ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್ ಕೆರೆಹಳ್ಳಿ ಮಾತನಾಡಿ, ಶಿಕ್ಷಕರ ದಿನಾಚರಣೆಯಂತಹ ಮಹತ್ವದ ಕಾರ್ಯಕ್ರಮಕ್ಕಿಂತ ಪಕ್ಕದ ತಾಲೂಕಿನಲ್ಲಿ ನಡೆದ ಪಾದಯಾತ್ರೆಗೆ ಶಾಸಕರು ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಆರೋಪಿಸಿದರು.ಶಿಕ್ಷಕರು ಸಮಾಜದ ನಿರ್ಮಾತೃಗಳು. ಅವರ ಸೇವಾ ಮನೋಭಾವಕ್ಕೆ ಗೌರವ ಸಲ್ಲಿಸುವ ದಿನದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗವಹಿಸುವುದು ಮುಖ್ಯವಾಗಿದೆ. ಆದರೆ ಶಿಕ್ಷಕರ ದಿನಾಚರಣೆಯಿಂದ ದೂರ ಉಳಿದಿರುವ ಕ್ರಮ ಶಿಕ್ಷಕ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಆನಂದ್ ಮೆಣಸೆ, ಜಿ.ಡಿ. ಮಲ್ಲಿಕಾರ್ಜುನ, ಮಂಜುಳಾ ಕೆ. ರಾವ್, ರಾಘವೇಂದ್ರ, ನಿವೃತ್ತ ಶಿಕ್ಷಕ ಧರ್ಮಪ್ಪ, ಗಣೇಶ್, ಮಹಮ್ಮದ್ ಹುಸೇನ್ ಹಾಗೂ ಇತರರು ಉಪಸ್ಥಿತರಿದ್ದರು.