Headlines

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ

ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು.

ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಬದಲಾವಣೆ ತರಬೇಕು ,ಮುಸಲ್ಮಾನರ ಮಕ್ಕಳೆಂದರೇ ಕೇವಲ ಪಂಚರ್ ಅಂಗಡಿ , ಗುಜುರಿ ಅಂಗಡಿ ಇಡುತ್ತಾರೆ ಎನ್ನುವುದು ಬದಲಾಗಲಿ ಉತ್ತಮ ಶಿಕ್ಷಣ ನೀಡಿ ನಿಮ್ಮಲ್ಲೂ ಐಪಿಎಸ್ ,ಐಎಎಸ್ ಮಾಡುವಂತಾಗಬೇಕು ಎಂದರು.

ನಾವೆಲ್ಲರೂ ಭಾರತೀಯರು ನಮ್ಮಲ್ಲಿ ಭೇಧ ಭಾವ ಬರಲೇ ಬಾರದು ,ತಮ್ಮ ತಮ್ಮ ಧರ್ಮವನ್ನು‌ ಆಚರಣೆ ಮಾಡುತ್ತಾ ಎಲ್ಲರನ್ನೂ ಗೌರವಿಸಬೇಕು,ನಾಡಿನಲ್ಲಿ ಕೆಲವರ ಸ್ವಾರ್ಥ ಹಿತಾಸಕ್ತಿಗಾಗಿ ಬಳಸಿಕೊಳ್ಳುತ್ತಿದ್ದಾರೆ. ಭಾರತದಲ್ಲಿ‌ ಪುರಾತನದಿಂದ ಹಿಡಿದು ಸ್ವಾತಂತ್ರ್ಯ ಹೋರಾಟದವರೆಗೂ ಸಹ ಎಂದಿಗೂ ಜಾತಿ-ಧರ್ಮದ ಹೆಸರಲ್ಲಿ ಸಂಘರ್ಷಗಳು ನಡೆದಿಲ್ಲ.ದ್ವೇಷ ಬಿಟ್ಟು ದೇಶ ಕಟ್ಟಬೇಕು. ವಿವೇಕದಿಂದ ವರ್ತಿಸಿ ಅವಿವೇಕತನವನ್ನು ತೊರೆಯಬೇಕು. ವಿಚಾರವಂತರಾಗಿ ವಿಕಾರತೆಯನ್ನು ತೊರೆಯಬೇಕೆಂದು ಹೇಳಿದರು.

ಸೌಹಾರ್ಧ ಸಂಗಮ ಕಾರ್ಯಕ್ರಮದ ಮುಖ್ಯ ಪ್ರಭಾಷಣಕಾರ ವಕ್ಫ಼್ ಕೌನ್ಸಿಲ್ ರಾಜ್ಯ ಉಪಾಧ್ಯಕ್ಷ ಶಾಫ಼ಿ ಸ ಅದಿ ಮಾತನಾಡಿ ಧರ್ಮದ ಹೆಸರಿನಲ್ಲಿ ನಡೆಯುವ ಗಲಭೆಗಳಿಂದ ಯಾವುದೇ ಧರ್ಮ ಉದ್ದಾರವಾಗಲು ಸಾಧ್ಯವಿಲ್ಲ, ದೇವರನ್ನು ನಂಬುವ ಮಂದಿ ಎಂದೂ ಅಶಾಂತಿಗೆ ಕಾರಣರಾಗುವುದಿಲ್ಲ. ದೇವರನ್ನು ನಂಬದ, ಧರ್ಮದ ಮೇಲೆ ಗೌರವ ಇಲ್ಲದ ನಕಲಿ ಧರ್ಮ ರಕ್ಷಕರು ಇಂದು ಸಮಾಜವನ್ನು ಕೆಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಭಾರತ ದೇಶದಲ್ಲಿರುವ ಪ್ರತಿಯೊಬ್ಬರೂ ಅಣ್ಣ ತಮ್ಮಂದಿರಂತೆ ಬಾಳಿದರೆ ಮಾತ್ರ ಜಗತ್ತಿನಲ್ಲಿ ನಮ್ಮ ದೇಶ ಶಕ್ತಿಯುತವಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರತೀಯೊಬ್ಬ ನಾಗರಿಕನೂ ಅವರವರ ಧರ್ಮಕ್ಕನುಸಾರವಾಗಿ ಪರಸ್ಪರ ಪ್ರೀತಿಯಿಂದ ಬದುಕಿದರೆ ಮಾತ್ರ ಸಮಾಜದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗಬಹುದು. ಮನುಷ್ಯರು ಮಾನವೀಯತೆಯಿಂದ ದೂರವಾಗುತ್ತಿದ್ದು ಪ್ರಾಣಿ, ಪಕ್ಷಿಗಳಿಂದ ನಾವು ಮಾನವೀಯತೆಯನ್ನು ಕಲಿಯಬೇಕಾದ ಸ್ಥಿತಿ ಎದುರಾಗಿದೆ. ದೇಶದ ಸಂವಿದಾನವನ್ನು ಪ್ರತೀಯೊಬ್ಬರು ಗೌರವಿಸಬೇಕು, ಕಾನೂನಿಗೆ ಗೌರವ ಕೊಡುವ ವ್ಯಕ್ತಿಗಳು ನಾವಾದರೆ ಎಲ್ಲ ಕಡೆಯೂ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉದ್ಯಮಿ ಮಹೇಂದ್ರ ಎಂ ಮಾತನಾಡಿ ನಶ್ವರವಾದ ಈ ಶರೀರವನ್ನು ಅಮರವಾದ ಕೆಲಸಕ್ಕೆ ಬಳಸಿಕೊಳ್ಳಬೇಕು ಎನ್ನುವ ಹಿನ್ನಲೆಯಲ್ಲಿ ಈ ಭೂಮಿಯ ಮೇಲೆ ನಮಗೆ ಬಹಳಷ್ಟು ತತ್ವ ಸಿದ್ದಾಂತಗಳನ್ನು ಅನೇಕ ಧರ್ಮಗುರುಗಳು , ಪ್ರವಾದಿಗಳು ಕೊಟ್ಟು ಹೋಗಿದ್ದಾರೆ ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸೌಹಾರ್ಧತೆಯ ಸಮಾಜ ಕಟ್ಟೋಣ ಎಂದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಮಾತನಾಡಿ ಮನುಕುಲಕ್ಕೆ ಶಾಂತಿ, ಮಾನವೀಯತೆಯನ್ನು ಕಲಿಸಿಕೊಟ್ಟ ಪ್ರವಾದಿಯವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಅನುಷ್ಠಾನಕ್ಕೆ ತರುವಂತಹ ಕೆಲಸ ಮಾಡಿದಾಗ ಮಾತ್ರ ಎಲ್ಲರೂ ಉತ್ತಮ ಹಾಗೂ ಸೌಹಾರ್ಧಯುತವಾಗಿ ಬದುಕಲು ಸಾಧ್ಯವಾಗುತ್ತದೆ , ಮುಂದಿನ ದಿನಗಳಲ್ಲಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಸ್ಥಾನಕ್ಕೆರುವ ಮೂಲಕ ಈ ಕ್ಷೇತ್ರದ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೆಡಿಪಿ ಸದಸ್ಯ ಆಸೀಫ಼್ ಭಾಷಾ ನಮ್ಮ ಸಮುದಾಯವು ಶೈಕ್ಷಣಿಕ ,ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ದಿ ಹೊಂದುತಿದ್ದು ಈ ಭಾಗದ ಅನೇಕ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಫಲಿತಾಂಶ ತರುತಿದ್ದು ,ಕ್ರೀಡಾ ಕ್ಷೇತ್ರದಲ್ಲೂ ಸಮುದಾಯದ ಯುವಕರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುತುತಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಹಾಗೂ ಪಟ್ಟಣದ ಮುಸ್ಲಿಂ ಬಾಂಧವರ ಬಹುದಿನಗಳ ಬೇಡಿಕೆಯಾದ ಸಮುದಾಯ ಭವನವನ್ನು ನಿರ್ಮಿಸಲು ಶಾಸಕ ಬೇಳೂರು ಗೋಪಾಲಕೃಷ್ಣ ಈಗಾಗಲೇ ಅನುದಾನವನ್ನು ಮಂಜೂರು ಮಾಡಿಸಿದ್ದಾರೆ ಅವರಿಗೆ ಸಮುದಾಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಸೌಹಾರ್ಧ ಸಂಗಮದ ವೇದಿಕೆಯಲ್ಲಿ ಬೆಂಗಳೂರಿನ ಉದ್ಯಮಿ ಮಹೇಂದ್ರ ಎಂ ಸಮುದಾಯ ಭವನ ನಿರ್ಮಾಣಕ್ಕೆ 15 ಲಕ್ಷ ರೂ ಚೆಕ್ ನ್ನು ಮಸೀದಿ ಸಮಿತಿಯವರಿಗೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ವಹಿಸಿದ್ದರು.

ಇದೇ ಸಂಧರ್ಭದಲ್ಲಿ SSLC ಹಾಗೂ PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ನಿಯಾಜ್ ನಾಸಿರ್ ರವರನ್ನು ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಧರ್ಮಗುರು ಮುನೀರ್ ಸಖಾಫಿ , ಈದ್ ಮಿಲಾದ್ ಸಮಿತಿ ಅಧ್ಯಕ್ಷ ಅಫ಼್ಜಲ್ ಬ್ಯಾರಿ , ತೀರ್ಥಹಳ್ಳಿ ಪಪಂ ಅಧ್ಯಕ್ಷ ರಹಮತುಲ್ಲಾ ಅಸಾದಿ, ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ , ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ , ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ , ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರುಗಳು ಹಾಗೂ ಇನ್ನಿತರರಿದ್ದರು. ರಿಜ್ವಾನ್ ಕಾರ್ಯಕ್ರಮವನ್ನು ನಿರೂಪಿಸಿದರು‌