Headlines

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

Two accused, including a woman, have been arrested by Shiralakoppa police for stealing gold ornaments worth ₹6.20 lakh from a passenger on a KSRTC bus. Police recovered 62 grams of gold jewellery and remanded the accused to judicial custody.

ಶಿಕಾರಿಪುರ, ಜೂನ್ 9: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಮಹಿಳೆ ಸೇರಿ ಇಬ್ಬರನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹6.20 ಲಕ್ಷ ಮೌಲ್ಯದ 62 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ತರಳಬಾಳು ಬಡಾವಣೆಯ ನಿವಾಸಿಯಾದ ಮಹಿಳೆಯೊಬ್ಬರು ಕಳೆದ ಏಪ್ರಿಲ್ 8ರಂದು ಶಿರಾಳಕೊಪ್ಪದಿಂದ ಹಿರೇಕೆರೂರಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದರು. ಬಸ್ ಸುಣ್ಣದಕೊಪ್ಪ ನಿಲ್ದಾಣದ ಸಮೀಪ ತಲುಪಿದ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿದ್ದ ಚಿನ್ನಾಭರಣಗಳು ಕಳುವಾಗಿರುವುದು ಬೆಳಕಿಗೆ ಬಂದಿತ್ತು.

ಈ ಕುರಿತು ಮಹಿಳೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಭಿಸಿದ್ದರು.
ಶಿಕಾರಿಪುರ ಉಪ ವಿಭಾಗದ ಡಿವೈಎಸ್ಪಿ ಕೇಶವ ಕೆ.ಇ. ಹಾಗೂ ಶಿಕಾರಿಪುರ ನಗರ ವೃತ್ತದ ಸಿಪಿಐ ಸಂತೋಷ್ ಎಂ. ಪಾಟೀಲ್ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಗಳನ್ನು ವೆಂಕಟೇಶ (35) ಹಾಗೂ ಹೊಸಮನೆಯ ಮಂಜುಳಾ ಸಿ (42) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳುವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

About The Author