Headlines

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಸಿಇಟಿ ಪರೀಕ್ಷೆಯಲ್ಲು ಕಡಿಮೆ ಅಂಕ ಬಂದಿದ್ದಕ್ಕೆ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

A CET student from Shikaripura who allegedly consumed weedicide after scoring low marks has died after 20 days of treatment. The funeral was held on Sunday.

ಶಿಕಾರಿಪುರ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಕಡಿಮೆ ಅಂಕ ಬಂದಿದ್ದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ದುರ್ಗವ್ವರ ಜಯಂತ್ ಎಂದು ಗುರುತಿಸಲಾಗಿದೆ. ಇವರು ಶಿಕಾರಿಪುರ ಪಟ್ಟಣದ ವಿನಾಯಕನಗರ ನಿವಾಸಿ ಹಾಗೂ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರ.

ಜೂನ್ 6ರಂದು ಪ್ರಕಟಗೊಂಡ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದು ಮನೆಯಲ್ಲಿದ್ದ ಕಳೆನಾಶಕ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ.

ತಕ್ಷಣವೇ ಕುಟುಂಬಸ್ಥರು ವಿದ್ಯಾರ್ಥಿಯನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಮಣಿಪಾಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಭಾನುವಾರ ಬೆಳಗ್ಗೆ ಶಿಕಾರಿಪುರದಲ್ಲಿ ವಿದ್ಯಾರ್ಥಿಯ ಅಂತ್ಯಕ್ರಿಯೆ ನೆರವೇರಿತು. ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

About The Author