ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

Three workers trapped under a landslide in Gandhinagar, Tirthahalli, were found dead after an eight-hour rescue operation. Bodies shifted to Tirthahalli Government Hospital for postmortem.

ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸತತ ಎಂಟು ಗಂಟೆಗಳ ಕಾರ್ಯಾಚರಣೆಯ ಬಳಿಕ ಪತ್ತೆಹಚ್ಚಿದ್ದಾರೆ.

ಭಾನುವಾರ ಬೆಳಗ್ಗೆ ಸುಮಾರು 5.30ಕ್ಕೆ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಮೂವರ ಮೃತದೇಹಗಳನ್ನು ಹೊರತೆಗೆದರು. ಧಾರಾಕಾರ ಮಳೆಯ ನಡುವೆಯೂ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸಿದ ಸಿಬ್ಬಂದಿ ಅಂತಿಮವಾಗಿ ಮೂವರ ಶವಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು.

ಮೃತರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನಿವಾಸಿಗಳಾಗಿದ್ದು, ಕೆಲಸದ ನಿಮಿತ್ತ ತೀರ್ಥಹಳ್ಳಿಗೆ ಆಗಮಿಸಿದ್ದರೆಂದು ತಿಳಿದುಬಂದಿದೆ.

ಗುಡ್ಡ ಕುಸಿತದಿಂದಾಗಿ ಮಣ್ಣಿನಡಿ ಸಿಲುಕಿದ್ದವರನ್ನು ಪತ್ತೆಹಚ್ಚಲು ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟರು. ಮಳೆ ಕಾರ್ಯಾಚರಣೆಗೆ ಕೆಲಕಾಲ ಅಡಚಣೆ ಉಂಟುಮಾಡಿದರೂ, ಸಿಬ್ಬಂದಿ ಕಾರ್ಯಾಚರಣೆಯನ್ನು ನಿಲ್ಲಿಸದೆ ಮುಂದುವರಿಸಿದರು.

ಪತ್ತೆಯಾದ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

About The Author