ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು
A NEET aspirant from Shikaripura in Shivamogga district died after consuming poison, allegedly due to mental distress following the NEET re-examination announcement. A case has been registered based on the father’s complaint.
ಶಿವಮೊಗ್ಗ, ಆ.6: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿಷ ಸೇವಿಸಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಶಿಕಾರಿಪುರ ಟೌನ್ನ ವಿನಾಯಕನಗರ ನಿವಾಸಿ ಝೇಂಕಾರಮೂರ್ತಿ ಮೃತಪಟ್ಟ ವಿದ್ಯಾರ್ಥಿ. ಈ ಕುರಿತು ಮೃತನ ತಂದೆ ಡಿ.ಎಚ್. ಹಾಲೇಶಪ್ಪ ಅವರು ಶಿಕಾರಿಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಪ್ರಕಾರ, ಮೇ 3ರಂದು ನಡೆದ ನೀಟ್ ಪರೀಕ್ಷೆಯನ್ನು ಝೇಂಕಾರಮೂರ್ತಿ ಬರೆದಿದ್ದರು. ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮರುಪರೀಕ್ಷೆ ಘೋಷಣೆ ಮಾಡಿದ ಬಳಿಕ ಆತ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದನು. ಮೇ 7ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ವಿನಾಯಕನಗರದಲ್ಲಿರುವ ತಮ್ಮ ಮನೆಯಲ್ಲಿ ವಿಷ ಸೇವಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ವಿಷ ಸೇವಿಸಿದ ಬಳಿಕ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಚಿಕಿತ್ಸೆ ನೀಡಿದರೂ ರಕ್ತದಲ್ಲಿ ವಿಷ ವ್ಯಾಪಕವಾಗಿ ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಜೂನ್ 27ರಂದು ಆತ ಮೃತಪಟ್ಟಿದ್ದಾನೆ.
ಈ ಸಂಬಂಧ ಶಿಕಾರಿಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಮ್ಮ ಮಗನ ಸಾವಿಗೆ ನೀಟ್ ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳೇ ಕಾರಣ ಎಂದು ಮೃತನ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.