ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

Minister Madhu Bangarappa visits the Thirthahalli landslide site, promises relief, housing support and financial assistance for affected families, and directs officials to take action on FIRs related to landslide incidents.

ತೀರ್ಥಹಳ್ಳಿ, ಆ.9: ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೂವರು ಮೃತಪಟ್ಟಿದ್ದು, ಈ ಪ್ರದೇಶದಲ್ಲಿದ್ದ ಕೆಲವು ಮನೆಗಳಿಗೂ ಹಾನಿಯಾಗಿದೆ. ಗುಡ್ಡ ಕುಸಿತದ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತಪಟ್ಟವರು ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಬಂದವರಾಗಿದ್ದರು. ಗುಡ್ಡ ಕುಸಿತದಿಂದ ಹಾನಿಗೊಳಗಾದ ಪ್ರದೇಶದಲ್ಲಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಈಗಾಗಲೇ ನೋಟಿಸ್ ನೀಡಲಾಗಿದೆ. ಮುಂದೆ ಇಂತಹ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಂತ್ರಸ್ತರು ಇದೇ ಪ್ರದೇಶದಲ್ಲಿ ಮತ್ತೆ ವಾಸಿಸಲು ಸಾಧ್ಯವಿಲ್ಲ. ಅವರಿಗೆ ನಿವೇಶನ ಒದಗಿಸುವುದರ ಜೊತೆಗೆ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಹೆಚ್ಚಿನ ನೆರವು ಕೊಡಿಸುವ ಪ್ರಯತ್ನ ಮಾಡಲಾಗುವುದು. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರದ ಬಗ್ಗೆ ಚರ್ಚಿಸುವುದಾಗಿ ಸಚಿವರು ತಿಳಿಸಿದರು.

ಸಂತ್ರಸ್ತ ಕುಟುಂಬಗಳಿಗೆ ವೈಯಕ್ತಿಕವಾಗಿ ₹1 ಲಕ್ಷ ನೆರವು ನೀಡುವುದಾಗಿ ಮಧು ಬಂಗಾರಪ್ಪ ಘೋಷಿಸಿದರು. ಜೊತೆಗೆ ಸ್ಥಳೀಯ ಯುವಕರು ಕೂಡ ₹5 ಲಕ್ಷ ನೆರವು ನೀಡಲು ಮುಂದಾಗಿದ್ದಾರೆ. ಸದ್ಯಕ್ಕೆ ಸಂತ್ರಸ್ತರು ಬಾಡಿಗೆ ಮನೆಯಲ್ಲಿ ವಾಸಿಸಲು ಅಗತ್ಯವಿರುವ ಬಾಡಿಗೆ ಹಣವನ್ನು ನೀಡುವ ಬಗ್ಗೆಯೂ ಪ್ರಯತ್ನಿಸಲಾಗುತ್ತಿದೆ ಎಂದರು.

ಹುಲಿಕಲ್ ಘಾಟಿ ಕುಸಿತ: ಎಫ್‌ಐಆರ್ ದಾಖಲಿಸಲು ಸೂಚನೆ

ತೀರ್ಥಹಳ್ಳಿ ಭೂಕುಸಿತ ಪ್ರಕರಣದ ಎಫ್‌ಐಆರ್ ಹಾಗೂ ಹುಲಿಕಲ್ ಘಾಟಿ ಕುಸಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗದಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹುಲಿಕಲ್ ಘಾಟಿಗೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿಯೇ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದ್ದೆ ಎಂದು ಹೇಳಿದರು.

ಇಂತಹ ಘಟನೆಗಳಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಈ ವಿಚಾರವನ್ನು ಅಧಿಕಾರಿಗಳ ಸಭೆಯಲ್ಲಿ ಮತ್ತೆ ಚರ್ಚಿಸಿ, ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡುತ್ತೇನೆ. ಕಾನೂನುಬದ್ಧವಾಗಿ ಯಾರ ವಿರುದ್ಧ ಪ್ರಕರಣ ದಾಖಲಿಸಬೇಕೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಫ್‌ಐಆರ್ ದಾಖಲಿಸಲು ಇಷ್ಟು ದಿನ ವಿಳಂಬವಾಗಿರುವುದಕ್ಕೆ ಕಾರಣವೇನು ಎಂಬುದರ ಬಗ್ಗೆಯೂ ತನಿಖೆ ನಡೆಸುವಂತೆ ಸೂಚಿಸುವುದಾಗಿ ಮಧು ಬಂಗಾರಪ್ಪ ತಿಳಿಸಿದರು.

ಹೊಸ ಸಚಿವರಿಗೆ ಖಾತೆ ಹಂಚಿಕೆ: ನಾಳೆ ನಿರ್ಧಾರ

ಹೊಸ ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಮಾತನಾಡಿದ ಮಧು ಬಂಗಾರಪ್ಪ, ಯಾವುದೇ ಖಾತೆ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದರು.

“ಶಾಲೆಗೆ ಸೇರುತ್ತೇನೋ, ಕಾಲೇಜಿಗೆ ಸೇರುತ್ತೇನೋ ಗೊತ್ತಿಲ್ಲ. ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಶಾಲೆಯಲ್ಲಿ ಈಗಾಗಲೇ ಶೇ.99 ಅಂಕ ಪಡೆದು ತೇರ್ಗಡೆಯಾಗಿದ್ದೇನೆ. ನಾಳೆ ಎಲ್ಲವೂ ತೀರ್ಮಾನವಾಗಲಿದೆ,” ಎಂದು ಅವರು ಹಾಸ್ಯಮಿಶ್ರಿತವಾಗಿ ಪ್ರತಿಕ್ರಿಯಿಸಿದರು.

ಈ ಕುರಿತು ಮುಖ್ಯಮಂತ್ರಿ ಈಗಾಗಲೇ ದೆಹಲಿಗೆ ಪ್ರವಾಸ ಕೈಗೊಂಡಿದ್ದು, ಅಲ್ಲಿಂದಲೇ ಖಾತೆ ಹಂಚಿಕೆ ಸೇರಿದಂತೆ ಮುಂದಿನ ಎಲ್ಲಾ ತೀರ್ಮಾನಗಳು ನಡೆಯಲಿವೆ ಎಂದು ಸಚಿವರು ಹೇಳಿದರು.

About The Author