ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

Hosanagara Taluk Advocates Association extends full support to the August 29 protest opposing the Kasturirangan report notification and its impact on farmers.

ಹೊಸನಗರ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಆಗಸ್ಟ್ 29ರಂದು ನಡೆಯಲಿರುವ ಹೋರಾಟಕ್ಕೆ ತಾಲ್ಲೂಕು ವಕೀಲರ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯಿಂದ ಮಲೆನಾಡಿನ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶದ ಗ್ರಾಮಗಳನ್ನು ಪರಿಸರ ಸೂಕ್ಷ್ಮವಲಯಕ್ಕೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯಿಂದ ಕೃಷಿ, ತೋಟಗಾರಿಕೆ, ವಸತಿ ಹಾಗೂ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಹಲವು ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ರೈತರು ತಮ್ಮ ಜಮೀನು ಹಾಗೂ ವಾಸದ ಮನೆಗಳಿಗೆ ಸಂಬಂಧಿಸಿದ ಹಕ್ಕುಪತ್ರ ಸೇರಿದಂತೆ ವಿವಿಧ ದಾಖಲೆಗಳಿಗಾಗಿ ಕಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸೂಕ್ಷ್ಮವಲಯ ಘೋಷಣೆ ಅವರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಗ್ರಾಮಸ್ಥರ ಅಭಿಪ್ರಾಯವನ್ನು ಪರಿಗಣಿಸದೆ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಗ್ರಾಮಸಭೆ, ರೈತರು, ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ವಕೀಲರ ಸಂಘದ ನಿಲುವಾಗಿದೆ ಎಂದು ಚಂದ್ರಪ್ಪ ಹೇಳಿದ್ದಾರೆ.

ರೈತರ ಹಕ್ಕು ಹಾಗೂ ಮಲೆನಾಡಿನ ಜನಜೀವನದ ರಕ್ಷಣೆಯ ದೃಷ್ಟಿಯಿಂದ ನಡೆಯುತ್ತಿರುವ ಈ ಹೋರಾಟಕ್ಕೆ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲವಿದ್ದು, ಹೋರಾಟ ಯಶಸ್ವಿಯಾಗಲು ಸಹಕರಿಸುವುದಾಗಿ ಅವರು ತಿಳಿಸಿದ್ದಾರೆ.

About The Author