ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ 5 ಸಾವಿರ ಕುಟುಂಬವಿದೆ. 63ವರ್ಷವಾದರೂ ಅವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಅರಣ್ಯ ಭೂಮಿ ಸಾಗುವಳಿದಾರರದ್ದು 14 ಸಾವಿರ ಕುಟುಂಬವಿದ್ದು ಅವರ ಎಲ್ಲ ಅರ್ಜಿಯನ್ನು ವಜಾ ಮಾಡಲಾಗಿದೆ. ಸಿಂಗಳೀಕ ಅಭಯಾರಣ್ಯ ಮಾಡಿ ಜನರು ರಸ್ತೆಯಲ್ಲಿ ತಿರುಗಲು ಸಾಧ್ಯವಾಗದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸ್ಲಂ ಮಾಡಿದ್ದಾರೆ. ಅದನ್ನು ಸುಂದರಗೊಳಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ ಎಂದರು.
ಮಲೆನಾಡನ್ನು ಶ್ಮಶಾನ ಮಾಡಲು ಹೊರಟಿದ್ದಾರೆ.38 ಸಾವಿರ ಎಕರೆ ರೈತರ ಹಕ್ಕುಪತ್ರ, ಆರ್ಟಿಸಿ ಇರುವ ಜಮೀನು ಅರಣ್ಯ ಎಂದು ಘೋಷಣೆ ಮಾಡಿದ್ದಾರೆ. ರೈತರು ಅವರ ಕುಟುಂಬ ತಮ್ಮ ಹಕ್ಕು ದಕ್ಕಿಸಿಕೊಳ್ಳಲು ನ್ಯಾಯಾಲಯಕ್ಕೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಇದರ ವಿರುದ್ಧ ಮಲೆನಾಡಿನ ಶಾಸಕನಾಗಿ ಸದನದಲ್ಲಿ ಗಟ್ಟಿಧ್ವನಿಯಲ್ಲಿ ಮಾತನಾಡುತ್ತೇನೆ. ರಾಜ್ಯಕ್ಕೆ ವಿದ್ಯುತ್ ಕೊಟ್ಟವರು ವಿದ್ಯುತ್ ಸಂಪರ್ಕಕ್ಕೆ ಪರಿತಪಿಸಬೇಕಾಗಿದೆ. ಇನ್ನು ಅನೇಕ ಆಶಯಗಳೊಂದಿಗೆ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಹೇಳಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್