Breaking
12 Jan 2026, Mon

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಗುರುವಾರ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು.  ಅಂಗಡಿಗಳು, ಶೋರೂಮ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ.

ದೀಪಾವಳಿಯ ಅಮವಾಸ್ಯೆಯ ದಿನವಾದ ಗುರುವಾರ ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು.

ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್ ಗಳ ಎದುರು ಹೆಚ್ಚಿನ ಜನಸಂದಣಿ ಕಂಡು ಬಂದಿದೆ. ಹೊಸಬಟ್ಟೆ, ಪೂಜಾ ಸಾಮಗ್ರಿ, ಪಟಾಕಿ ಖರೀದಿ ಭರಾಟೆ ಜೋರಾಗಿತ್ತು.

ಎಲ್ಲಾ ರಸ್ತೆಗಳಲ್ಲಿ ಬಾಳೆಕಂದು, ಉತ್ರಾಣಿ, ಮಾವಿನಸೊಪ್ಪು, ಬಗೆಬಗೆಯ ಹೂವುಗಳು, ಕುಂಬಳಕಾಯಿ ಮೊದಲಾದವುಗಳನ್ನು ಜನರು ಖರೀದಿಸುವ ದೃಶ್ಯ ಸಾಮಾನ್ಯವಾಗಿತ್ತು. ಈ ಬಾರಿ ಪಟ್ಟಣಕ್ಕೆ ಚೆಂಡು ಹೂವು ರಾಶಿ ರಾಶಿಯಾಗಿ ಮಾರಾಟಕ್ಕೆ ಬಂದಿದೆ. ದೀಪಾವಳಿ ಎಂದರೆ ಚೆಂಡು ಹೂವುಗಳ ರಾಜ ಎಂದೆ ಅರ್ಥ. ಅದರ ಜೊತೆಗೆ ಆಕಾಶಬುಟ್ಟಿ, ಹಣತೆ, ಕೆರಕನ ವಸ್ತುಗಳ ಮಾರಾಟವೂ ಜೋರಾಗಿತ್ತು.

ವಿನಾಯಕ ವೃತ್ತ ಸೇರಿದಂತೆ ಹಲವು ಪ್ರಮುಖ ರಸ್ತೆಗಳ ವರ್ತಕರು ತಮ್ಮ ಅಂಗಡಿ ಮಳಿಗೆಗಳ ಎದುರು ರಂಗೋಲಿ ಹಾಕಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು ಕಂಡು ಬಂದಿತು. ಅನೇಕರು ತಮ್ಮ ಮನೆ,ಅಂಗಡಿಗಳಲ್ಲಿ ವಿಶೇಷ ವಿದ್ಯುತ್ ದೀಪಲಂಕಾರ ಮಾಡಿದ್ದಾರೆ. ಆಕಾಶಬುಟ್ಟಿ ಕಟ್ಟಿ ಬೆಳಕಿನ ಹಬ್ಬ ಆಚರಿಸಲು ಮುಂದಾಗಿದ್ದ ದೃಶ್ಯ ಕಂಡು ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ ಇಂದು ಹಬ್ಬದ ಸಿದ್ಧತೆ ಜೋರಾಗಿತ್ತು. ಕೆಮ್ಮಣ್ಣು, ಉರುಮಂಜು ತಂದು ಮನೆಯ ಗೋಡೆಗಳಿಗೆ ಬಳಿಯುವುದು, ಬೇಸಾಯದ ಸಲಕರಣೆಗಳ ತೊಳೆದು ಒಟ್ಟಾಗಿ ಜೋಡಿಸಿಟ್ಟು ಪೂಜಿಸುವುದು ರೂಢಿಯಲ್ಲಿದೆ. ಕುಂಟೆ, ನೊಗ, ಎತ್ತಿನ ಗಾಡಿ, ನೇಗಿಲು ಮುಂತಾದ ಎಲ್ಲಾ ವ್ಯವಸಾಯ ಉಪಕರಣಗಳನ್ನು ರೈತರು ಬಹಳ ಶ್ರದ್ಧೆ, ಭಕ್ತಿಯಿಂದ ಪೂಜಿಸುವ ದೃಶ್ಯ ಕಂಡು ಬಂದಿದೆ. ಮಕ್ಕಳು ಹೊಸ ಬಟ್ಟೆ ಧರಿಸಿ ಕುಣಿದು ಕುಪ್ಪಳಿಸಿದರೆ ಪಟಾಕಿ ಸದ್ದು ಕೂಡ ಅಲ್ಲಲ್ಲಿ ಕೇಳಿ ಬರುತ್ತಿತ್ತು. ಈ ಬಾರಿ ಪಟಾಕಿ ಹಾವಳಿ ಹೆಚ್ಚಾಗಿ ಇಲ್ಲದಿದ್ದರೂ ಕೂಡ ಕಡಿಮೆಯೇನೂ ಇರಲಿಲ್ಲ. ಹೆಚ್ಚು ಅಪಾಯಕಾರಿಯಲ್ಲದ ಹಸಿರು ಪಟಾಕಿಗಳನ್ನು ಜನರು ಖರೀದಿಸಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *